ಮೂಡಲಗಿ: ತಾಲೂಕಿನ ವಿವಿಧ ಗ್ರಾಪಂಗಳಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ಶಾಲಾಭಿವೃದ್ಧಿ ಕಾಮಗಾರಿಗಳನ್ನು ಬುಧವಾರ ಜಿಪಂ ಸಿಇಒ ದರ್ಶನ್ ಎಚ್.ವಿ. ಅವರು ಭೇಟಿ ನೀಡಿ ಪರಿಶೀಲಿಸಿದರು.
ರಾಜಾಪುರ, ತುಕ್ಕಾನಟ್ಟಿ, ಗುಜನಟ್ಟಿ, ಹಳ್ಳೂರ, ಶಿವಾಪುರ ಎಚ್, ಖಾನಟ್ಟಿ, ಮುಸಗುಪ್ಪಿ ಗ್ರಾಮ ಪಂಚಾಯತ್ ಗಳಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ಆಟದ ಮೈದಾನ, ಶೌಚಾಲಯ, ಕಂಪೌಂಡ, ಪೇವರ್ಸ್, ಭೋಜನಾಲಯ ಸೇರಿದಂತೆ ಶಾಲಾ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಸಿಇಒ ದರ್ಶನ್ ಎಚ್.ವಿ. ಅವರು, ಶಾಲಾಭಿವೃದ್ಧಿ ಕಾಮಗಾರಿಗಳನ್ನು ಉತ್ತಮವಾಗಿ ಕೈಗೊಳ್ಳಲಾಗಿದೆ. ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಇದೇ ಸಂದರ್ಭದಲ್ಲಿ ತುಕ್ಕಾನಟ್ಟಿ ಗ್ರಾಮದಲ್ಲಿ ಪೋಷಣ ಅಭಿಯಾನಕ್ಕೆ ಚಾಲನೆ ನೀಡಿದರು. ಮಕ್ಕಳಿಗೆ ನೀಡಲಾಗುವ ಆಹಾರವನ್ನು ಪರಿಶೀಲಿಸಿದರು. ಮಕ್ಕಳಿಗೆ ಗುಣಮಟ್ಟದ ಆಹಾರ ನೀಡುವ ನಿಟ್ಟಿನಲ್ಲಿ ಶಿಕ್ಷಕರು ಗಮನಹರಿಸಬೇಕು ಎಂದು ತಿಳಿಸಿದರು.
ಅದೇ ರೀತಿ ಹಳ್ಳೂರ ಮತ್ತು ಮುಸಗುಪ್ಪಿ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ತಾಪಂ ಇಒ ಎಫ್.ಜಿ.ಚಿನ್ನಣ್ಣವರ, ಎಇಇ ಉದಯಕುಮಾರ ಕಾಂಬಳೆ, ತಾಪಂ ಸಹಾಯಕ ನಿರ್ದೇಶಕ (ಗ್ರಾಉ) ಸಂಗಮೇಶ ರೊಡ್ಡನ್ನವರ, ತಾಂತ್ರಿಕ ಸಂಯೋಜಕ ನಾಗಾರ್ಜುನ, ಜೆಇ ಸುರೇಶ ಹಾಗೂ ಪಂಚಾಯತಿ ಸಿಬ್ಬಂದಿ ಉಪಸ್ಥಿತರಿದ್ದರು.
